25 ಗೋವುಗಳನ್ನು ದತ್ತು ಸ್ವೀಕರಿಸುವ ಮೂಲಕ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟು ಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರೂ, ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಗಳಾದ ಯಶ್ ಪಾಲ್ ಸುವರ್ಣ ಅವರು ನೀಲಾವರ ಗೋಶಾಲೆಯ 25 ಗೋವುಗಳನ್ನು ದತ್ತು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ಗೋವುಗಳನ್ನು ದತ್ತು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ತಮ್ಮ ಈ ಕಾರ್ಯ ಇತರರಿಗೆ ಪ್ರೇರಣೆಯಾಗಲಿ. ಗೋ ಸಂತತಿಯ ರಕ್ಷಣೆಗೆ ತಮ್ಮ ಸೇವೆ ನಿರಂತರವಾಗಿರಲಿ ಎಂದು ಹಾರೈಸಿದರು.

ಗೋರಕ್ಷಣೆಗೆ ಅಭಿಯಾನ:
ಗೋಮಾತೆಯ ಸಂರಕ್ಷಣೆಯ ಸಂಕಲ್ಪದೊಂದಿಗೆ ಗೋವುಗಳನ್ನು ದತ್ತು ಸ್ವೀಕರಿಸುವ ಮೂಲಕ ಗೋಶಾಲೆಗಳಿಗೆ ಆರ್ಥಿಕವಾಗಿ ಶಕ್ತಿ ತುಂಬಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಗೋವುಗಳನ್ನು ದತ್ತು ಸ್ವೀಕರಿಸುವತ್ತ ದಾನಿಗಳನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಅಭಿಯಾನ ರೂಪಿಸಲಾಗುವುದು ಎಂದು ಯಶ್ ಪಾಲ್ ಸುವರ್ಣ ತಿಳಿಸಿದರು.

ವಾಸುದೇವ ಭಟ್ ಪೆರಂಪಳ್ಳಿ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ ಹೆರ್ಗ, ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.