ಸ್ಥಳೀಯ ಯುವಜನರಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಿ, ಉದ್ಯೋಗಸ್ಥರನ್ನಾಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತವಿರುವ ಕೈಗಾರಿಕಾ ಘಟಕಗಳಲ್ಲಿ ವೃತ್ತಿಯನ್ನು ಕೈಗೊಳ್ಳಲು ಅವಶ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು, ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ನೀಡಿ, ಸ್ಥಳೀಯವಾಗಿ ಉದ್ಯೋಗ ಲಭ್ಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೈಗಾರಿಕೆಗಳ ಸ್ಥಾಪನೆಯಿಂದ ರಾಜ್ಯದ ಆರ್ಥಿಕ ಪ್ರಗತಿ ಆಗುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗುತ್ತದೆ. ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳು ಸ್ಥಾಪನೆಯಾದಲ್ಲಿ ಇಲ್ಲಿನವರಿಗೆ ಉದ್ಯೋಗಗಳು ದೊರೆಯುತ್ತವೆ. ಇದರಿಂದ ಉದ್ಯೋಗವನ್ನು ಅರಸಿ ಹೊರ ಜಿಲ್ಲೆಗೆ ತೆರಳುವುದು ಕಡಿಮೆಯಾಗುತ್ತದೆ.

ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯಗಳನ್ನು ನೀಡಲು ಹೆಚ್ಚು ಒತ್ತು ನೀಡಬೇಕು ಎಂದರು.

ಜಿಲ್ಲೆಯಲ್ಲಿರುವ ಐ.ಟಿ.ಐ, ಡಿಪ್ಲೋಮಾ, ಜಿ.ಟಿ.ಟಿ.ಸಿ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಿಗೆ ಅಗತ್ಯವಿರುವ ತರಬೇತಿ ಕೋರ್ಸುಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿಯೇ ಪ್ರಾರಂಭಿಸಬೇಕು.

ಇಲ್ಲಿನ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಮಾಡಲು ಅವಕಾಶ ಕಲ್ಪಿಸಬೇಕು. ವೃತ್ತಿಪರ ಕೋರ್ಸುಗಳು ಮುಗಿದ ನಂತರ ಕೈಗಾರಿಕಾ ಘಟಕಗಳಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿಗಳನ್ನೂ ಸಹ ವಿದ್ಯಾರ್ಥಿಗಳಿಗೆ ನೀಡಬೇಕು. ಇದರಿಂದ ಯುವಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಜಿಲ್ಲೆಯಲ್ಲಿ 37 ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿ ಶೇ. 91.8 ರಷ್ಟು, 47 ಮಧ್ಯಮ ಪ್ರಮಾಣದ ಕೈಗಾರಿಕೆಗಳಲ್ಲಿ ಶೇ. 95.1 ರಷ್ಟು ಹಾಗೂ 7 ಬೃಹತ್ ಕೈಗಾರಿಕೆಗಳಲ್ಲಿ ಶೇ. 92.4 ರಷ್ಟು ಸೇರಿದಂತೆ ಒಟ್ಟು 91 ಘಟಕಗಳಲ್ಲಿ ಶೇ. 93.7 ರಷ್ಟು ಉದ್ಯೋಗ ಕಲ್ಪಿಸಲಾಗಿದೆ ಎಂದರು.

ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯಾಗಿ ಮೂರು-ನಾಲ್ಕು ವರ್ಷಗಳು ಕಳೆದರೂ ಸಹ ಪೂರ್ಣಪ್ರಮಾಣದಲ್ಲಿ ಉದ್ದಿಮೆದಾರರು ಉದ್ದಿಮೆ ಪ್ರಾರಂಭಿಸದೇ ಪ್ರತೀ ಸಭೆಯಲ್ಲಿಯೂ ಕಾಲಾವಕಾಶ ಕೋರಿ ಸಭೆಯ ಸಮಯವನ್ನು ವ್ಯರ್ಥ ಮಾಡುತ್ತಿದ್ದೀರಿ. ಇದು ಸರಿಯಲ್ಲ. ಮುಂದಿನ ಎರಡು ತಿಂಗಳ ಒಳಗಾಗಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಪಡೆದಿರುವವರು ಘಟಕಗಳನ್ನು ಸ್ಥಾಪಿಸಬೇಕು. ತಪ್ಪಿದ್ದಲ್ಲಿ ನಿವೇಶನವನ್ನು ಇತರರಿಗೆ ಹಂಚಿಕೆ ಮಾಡಲಾಗುವುದು ಎಂದರು.

ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟಕದ ಕೆಲವು ಚಟುವಟಿಕೆ ಬದಲಾವಣೆಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಹೆಚ್ಚಾಗಿ ರೆಡಿ ಮಿಕ್ಸ್ ಕಾಂಕ್ರೀಟ್ ಸ್ಥಾಪನೆಗೆ ಅರ್ಜಿಗಳಿದ್ದು, ಇವುಗಳಿಗೆ ಮಾನ್ಯ ಮಾಡುವ ಮೊದಲು ಸುತ್ತಮುತ್ತಲಿನ ಇತರೆ ಘಟಕಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗುತ್ತದೆ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ನಂತರದಲ್ಲಿ ಅನುಮತಿ ನೀಡಬೇಕು ಎಂದರು.

ಕಳೆದ ಸಾಲಿನಲ್ಲಿ ಮರೈನ್ ಪ್ರೋಡಕ್ಟ್, ಕ್ಯಾಶ್ಯೂ ನಟ್, ಕಾಫಿ ಬೀನ್ ಸೇರಿದಂತೆ ಮತ್ತಿತರ 9 ಉತ್ಪನ್ನಗಳು ಹೆಚ್ಚಾಗಿ ರಫ್ತಾಗಿದ್ದು, 2,593 ಕೋಟಿ ರೂ.ಗೂ ಹೆಚ್ಚು ವಹಿವಾಟು ನಡೆಸಲಾಗಿದೆ. ಇನ್ನಷ್ಟು ರಫ್ತುಗಳನ್ನು ಜಿಲ್ಲೆಯಿಂದ ಮಾಡಲು ಉತ್ತೇಜನ ನೀಡಬೇಕು ಎಂದರು.

ಜಿಲ್ಲೆಯ ಸ್ವಚ್ಛತೆಗೆ ಪ್ರತಿಯೊಬ್ಬರೂ ಹೆಚ್ಚು ಒತ್ತು ನೀಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ನಾವೂ ಸಹ ಆರೋಗ್ಯಕರವಾಗಿರಲು ಸಾಧ್ಯ. ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಅರಿವು ಮೂಡಿಸುವ ಕಾರ್ಯಗಳಿಗೆ ಹಾಗೂ ಒಣತ್ಯಾಜ್ಯಗಳ ಸಂಗ್ರಹ ಘಟಕಗಳನ್ನು ಸ್ಥಾಪಿಸಲು ಕೈಗಾರಿಕೋದ್ಯಮಗಳು ಕೈಜೋಡಿಸಬೇಕು ಎಂದ ಅವರು, ಕೈಗಾರಿಕೆಗಳಲ್ಲಿ, ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ದ್ರವತ್ಯಾಜ್ಯಗಳನ್ನು ಸಂಸ್ಕರಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಛೇಂಬರ್ಸ್ ಆಫ್ ಕಾಮರ್ಸ್ನ ಅಧ್ಯಕ್ಷಾರದ ಅಮ್ಮುಂಜೆ ಪ್ರಭಾಕರ ನಾಯಕ್, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.