ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ರಾಹುಲ್ ಗಾಂಧಿ: ಕಾಂಗ್ರೆಸ್ ನಿಂದ ಮಹತ್ವದ ಘೋಷಣೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಬಹು ದೊಡ್ಡ ನಿರ್ಧಾರದಲ್ಲಿ ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಪಕ್ಷವು ಘೋಷಿಸಿದೆ. ಕಳೆದು ಕೆಲವು ದಿನಗಳಿಂದ ರಾಹುಲ್ ಗಾಂಧಿ ಅಮೇಥಿಯಿಂದ ಮರಳಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ರಾಹುಲ್ ಗಾಂಧಿಯು ಕೇರಳದ ವಯನಾಡ್ ಮತ್ತು ಅಮೇಥಿ ಎರಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನುವಂತಹ ಮಾತುಗಳನ್ನು ತೇಲಿ ಬಿಡಲಾಗಿತ್ತು.

ಆದರೆ ಇದೀಗ ರಾಹುಲ್ ಗಾಂಧಿ ತಮ್ಮ ತಾಯಿಯಿಂದ ತೆರವಾದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ. ಸೋನಿಯಾಗಾಂಧಿ ರಾಜ್ಯಸಭೆ ಪ್ರವೇಶಿಸಿದ್ದು ಈ ಕ್ಷೇತ್ರವನ್ನು ರಾಹುಲ್ ಗಾಂಧಿ ಪ್ರತಿನಿಧಿಸಲಿದ್ದಾರೆ.

ಅಮೇಥಿಯಲ್ಲಿ, ಕಾಂಗ್ರೆಸ್ ಅನ್ನು ಗಾಂಧಿ ಕುಟುಂಬದ ದೀರ್ಘಕಾಲದ ನಿಷ್ಠಾವಂತ ಕಿಶೋರಿ ಲಾಲ್ ಶರ್ಮಾ ಪ್ರತಿನಿಧಿಸುತ್ತಾರೆ.

ಮೇ 20 ರಂದು ಐದನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.