ಗ್ರಾಪಂ ಚುನಾವಣೆಗೆ ಈಗಿನಿಂದಲೇ ಸಜ್ಜಾಗಿ: ಸಂಘಟನೆ, ಕ್ರಿಯಾಶೀಲತೆ ಕಾರ್ಯಕರ್ತರ ಮುಖ್ಯ ಆದ್ಯತೆಯಾಗಲಿ-ಸಚಿವ ಕೋಟ

ಉಡುಪಿ: ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಕಾರ್ಯಕರ್ತರು ಗ್ರಾಪಂ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್

ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ-ಮಂಡಲಗಳ ಅಧ್ಯಕ್ಷರು

ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದರು.

ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು, ಕಾರ್ಯಕರ್ತರು ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರತಿ ಮತಗಟ್ಟೆ, ಮಹಾಶಕ್ತಿಕೇಂದ್ರ, ಮಂಡಲ ಮತ್ತು ಜಿಲ್ಲಾಮಟ್ಟದ ಪದಾಧಿಕಾರಿಗಳು ಹಾಗೂ ವಿವಿಧ ಸ್ತರದ

ಜನಪ್ರತಿನಿಧಿಗಳು ಕಾರ್ಯಕರ್ತರೊಂದಿಗೆ ಒಂದು ತಂಡವಾಗಿ ತೊಡಗಿಸಿಕೊಂಡು ಗ್ರಾ.ಪಂ. ಚುನಾವಣೆಯಲ್ಲಿ

ಪ್ರಚಂಡ ಗೆಲುವಿಗೆ ಕಂಕಣಬದ್ಧರಾಗಬೇಕು ಎಂದರು.

‘ಆಯುಷ್ಮಾನ್ ಭಾರತ್’ ಯೋಜನೆಯಡಿ ನೊಂದಾಯಿತ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಚಿಕಿತ್ಸೆಯು ಸಂಪೂರ್ಣವಾಗಿ ಉಚಿತವಾಗಿದೆ. ಕೊರೊನಾ

ವಿಚಾರವಾಗಿ ಆಧಾರ ರಹಿತ ಆರೋಪಗಳು ಕೇಳಿಬರುತ್ತಿವೆ. ಇವೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಜನತೆ ವದಂತಿಗಳಿಗೆ ಕಿವಿಗೊಡದೆ ಸರಕಾರದ ಆರೋಗ್ಯ ಸುರಕ್ಷತಾ

ಮಾರ್ಗಸೂಚಿಗಳನ್ನು ಪಾಲಿಸುವುದು ಇಂದಿನ ಅಗತ್ಯ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡ, ಕೊರೊನಾ ಬಗ್ಗೆ ವಿರೋಧ ಪಕ್ಷಗಳ ಆರೋಪಗಳಲ್ಲಿ ಹುರುಳಿಲ್ಲ. ವೈದ್ಯಕೀಯ ಚಿಕಿತ್ಸೆಯ

ನಿಯಮದಂತೆ ಕೊರೊನಾ ಟೆಸ್ಟ್, ಲ್ಯಾಬ್ ಟೆಸ್ಟ್ ಇತ್ಯಾದಿಗಳು ನಡೆಯುತ್ತಿವೆ. ಈ ವಿಚಾರದಲ್ಲಿ ಯಾವುದೇ

ತಪ್ಪು ಕಲ್ಪನೆ ಮಾಡುವ ಅಗತ್ಯವಿಲ್ಲ. ಕೊರೊನಾ ಪಾಸಿಟಿವ್ ವ್ಯಕ್ತಿಯ ಚಿಕಿತ್ಸೆಗೆ ಸಂಬಂಧಿಸಿ ದಿನ ಒಂದಕ್ಕೆ ಬೆಡ್ ಚಾರ್ಜ್ 5,200 ರೂ. ಹಾಗೂ ವೆಂಟಿಲೇಟರ್

ಸಹಿತ ಬೆಡ್ ಚಾರ್ಜ್ 10 ಸಾವಿರ ಮೊತ್ತವನ್ನು ರಾಜ್ಯ ಸರಕಾರವೇ ಭರಿಸುತ್ತಿದೆ. ಹಾಗಾಗಿ ಜನರು ವದಂತಿಗಳಿಗೆ ಕಿವಿಗೊಡದೆ, ವೈದ್ಯರು ಹಾಗೂ ಕೊರೊನಾ ವಾರಿಯರ್ಸ್ ಗಳಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ- ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ

ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿವಂದಿಸಿದರು.