ಹಿರಿಯಡಕ: ಹಾಲಿನ ವಾಹನ-ಸ್ಕೂಟರ್ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಹಿರಿಯಡಕ: ಹಾಲಿನ ವಾಹನ ಹಾಗೂ ಸ್ಕೂಟರ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಗುಡ್ಡೆಯಂಗಡಿಯ ಅಂಗನವಾಡಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮೃತ ಸವಾರನನ್ನು ಬೈಲೂರು ಚಿಕ್ಕಲ್ ಬೆಟ್ಟು ನಿವಾಸಿ ವಿಘ್ನೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ವಿಘ್ನೇಶ್ ಮಣಿಪಾಲದ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದನು.

ಈತ ಗುಡ್ಡೆಯಂಗಡಿಗೆ ಸಮೀಪಿಸುತ್ತಿದ್ದಂತೆ ಎದುರಿನಿಂದ ಬರುತ್ತಿದ್ದ ಹಾಲಿನ ವಾಹನಕ್ಕೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಬೆಳಿಗ್ಗೆ 6.40ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ ಎಂದು ತಿಳಿದುಬಂದಿದೆ.

ಹಾಲಿನ ವಾಹನ ಬಜಗೋಳಿಯಿಂದ ಉಡುಪಿ ಕಡೆಗೆ ಹೋಗುತ್ತಿತ್ತು. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಘ್ನೇಶ್ ದೀಪಾವಳಿಗೆ ನೂತನವಾಗಿ ದ್ವಿಚಕ್ರವಾಹನ ಖರೀದಿಸಿದ್ದನು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.