ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ: ನಾಳೆ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವರುಣಾ ಕ್ಷೇತ್ರದಲ್ಲೂ ಸಹಾ ಸಂಭ್ರಮ ಮನೆ ಮಾಡಿದೆ.

ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಕರೆಂಟ್ ಫ್ರೀ, ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯನವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ.