ನ. 27ರಿಂದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಮೇಳದ ಪ್ರದರ್ಶನ ಆರಂಭ

ಮಂಗಳೂರು: ತೆಂಕುತಿಟ್ಟು ಯಕ್ಷಗಾನದ ಮೇರು ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ನೂತನ ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೇಳದ ಪ್ರದರ್ಶನ ನವೆಂಬರ್ 27 ರಿಂದ ಆರಂಭವಾಗಲಿದೆ.

ಈ ಬಗ್ಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು.
ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್ ನೂತನ ಮೇಳದ ಬಗ್ಗೆ ಮಾಹಿತಿ ನೀಡಿ, ಸೀಮಿತ ಕಾಲಮಿತಿಯಲ್ಲಿ ಮೇಳದ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಯಿಂದ 11ರ ವರೆಗಿನ ಅವಧಿಯಲ್ಲಿ ಪ್ರದರ್ಶನ ಜರುಗಲಿದ್ದು, ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19 ಮಾರ್ಗಸೂಚಿಯಂತೆ ನಡೆಯಲಿದೆ ಎಂದು ತಿಳಿಸಿದರು.

ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿದ್ದಾರೆ. ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಪಾಲ್ಗೊಳ್ಳಲಿದ್ದಾರೆ.

ಹಾಸ್ಯ ಪಾತ್ರಧಾರಿಗಳಾಗಿ ಉಜಿರೆ ನಾರಾಯಣ, ಸಂದೇಶ್ ಮಂದಾರ, ಸ್ತ್ರೀ ಪಾತ್ರಧಾರಿಗಳಾಗಿ ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು ಇರಲಿದ್ದಾರೆ.

ಪ್ರಧಾನ ಪಾತ್ರದಲ್ಲಿ ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.