ಕ್ರಿಶ್ಚಿಯನ್ ಸಮುದಾಯದ ಅಭಿವೃದ್ದಿಗಾಗಿ ನೀಡುವ ಸೌಲಭ್ಯಗಳ ಅರಿವು ಮೂಡಿಸಲು ರಾಜ್ಯಾದ್ಯಂತ ಸಂಚಾರ: ಕೆನಡಿ ಶಾಂತಕುಮಾರ್

ಉಡುಪಿ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಮೂಲಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯುವಂತೆ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್ ಹೇಳಿದರು.

ಅವರು ಶನಿವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕ್ರಿಶ್ಚಿಯನ್ ಸಮುದಾಯದವರಿಗೆ ಇಲಾಖೆ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ವತಿಯಿಂದ ರಾಜ್ಯಾದ್ಯಂತ ಚರ್ಚ್ ಗಳ ಜೀರ್ಣೋದ್ಧಾರ, ಸ್ಮಶಾನ ಗೋಡೆ, ಚರ್ಚ್ ಆವರಣ ಗೋಡೆ ನಿರ್ಮಾಣ ಕಾಮಗಾರಿಗಳಿಗೆ, ಕ್ರಿಶ್ಚಿಯನ್ ಸಮುದಾಯ ಭವನಗಳ ನಿರ್ಮಾಣಕ್ಕೆ, ಕ್ರಿಶ್ಚಿಯನ್ ವೃದ್ಧಾಶ್ರಮಗಳು ಮತ್ತು ಅನಾಥಾಲಯಗಳ ಆಡಳಿತಾತ್ಮಕ ವೆಚ್ಚ ಪಾವತಿ ಮುಂತಾದ ಯೋಜನೆಗಳಿದ್ದು, ಸಮುದಾಯದ ಜನತೆಗೆ ಈ ಬಗ್ಗೆ ಮಾಹಿತಿಯ ಕೊರತೆ ಇದ್ದು, ಇದಕ್ಕಾಗಿ ರಾಜ್ಯಾದ್ಯಂತ ಸಂಚರಿಸಿ ಅರಿವು ಮೂಡಿಸಿ, ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಈ ಕಾರ್ಯಕ್ರಮಗಳ ಜೊತೆಗೆ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಫೆಲೋಶಿಪ್, ಪ್ರೀ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಹಾಸ್ಟೆಲ್‌ಗಳಲ್ಲಿ ಪ್ರವೇಶಾವಕಾಶ, ಪ್ರೋತ್ಸಾಹಕ ಸಾಲ ಯೋಜನೆಗಳು, ಟ್ಯಾಕ್ಸಿ ಮತ್ತು ಗೂಡ್ಸ್ ವಾಹನಗಳ ಖರೀದಿಗೆ ಸಬ್ಸಿಡಿ, ನೇರ ಸಾಲ, ಶ್ರಮಶಕ್ತಿ ಸಾಲ, ಅರಿವು ಸಾಲ ನೀಡಲಾಗುತ್ತಿದ್ದು, ಈ ಎಲ್ಲಾ ಯೋಜನೆಗಳ ಸಂಪೂರ್ಣ ಪ್ರಯೋಜನಗಳನ್ನು ಸಮುದಾಯದ ಜನತೆ ಪಡೆಯಬೇಕು ಎಂದರು.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಉಡುಪಿ, ಮೂಡುಬೆಳ್ಳೆ ಮತ್ತು ತೆಗ್ಗರ್ಸೆಯಲ್ಲಿ ಒಟ್ಟು 3 ಕ್ರಿಶ್ಚಿಯನ್ ಸಮುದಾಯ ಭವನಗಳ ನಿರ್ಮಾಣಕ್ಕೆ 1.27 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಇನ್ನೂ 2 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.