ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ ನೇಮಕ

ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ ಅವರು ಆಯ್ಕೆಯಾಗಿದ್ದಾರೆ.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಅಭಿವೃದ್ಧಿ ಸಮಿತಿಯ ಖಾಯಂ ಆಹ್ವಾನಿತರಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಜಯ ಸಿ. ಸುವರ್ಣ ಅವರ ನಿಧನದಿಂದ ತೆರವಾದ ಗೌರವಾಧ್ಯಕ್ಷ ಸ್ಥಾನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಗೌರವಾಧ್ಯಕ್ಷ ಮೂಳೂರು ಸುಧಾಕರ ಹೆಗ್ಡೆ  ಮುಂಬೈ, ಹೊಸ ಮಾರಿಗುಡಿ ದೇವಸ್ಥಾನದ ಆಡಳಿತಾಧಿಕಾರಿ ರವಿ ಕುಮಾರ್, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ- ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.