ಆಂತರಿಕ ಭದ್ರತೆಗೆ ಆಧುನಿಕ ತಂತ್ರ‍ಜ್ಞಾನ ಬಳಕೆ: ಭಾಸ್ಕರ್ ರಾವ್

ಉಡುಪಿ: ರಾಜ್ಯದ ಆಂತರಿಕ ಭದ್ರತೆಗೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮಲ್ಪೆಯ ಕರಾವಳಿ ಕವಲು ಪಡೆಯ ಕಚೇರಿಯಲ್ಲಿ ಮೀನುಗಾರ ಮುಖಂಡರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು.

ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಮೂಲಕ ರಾಜ್ಯದ ಅಂತರಿಕ ಭದ್ರೆತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕರಾವಳಿ ಕಾವಲು ಪಡೆಗೆ ಅಗತ್ಯ ಉಪಕರಣಗಳ ಖರೀದಿ, ಪ್ರತ್ಯೇಕ ಸಿಬ್ಬಂದಿ  ನೇಮಕ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಿಬ್ಬಂದಿಗಳಲ್ಲಿ ದೈಹಿಕ , ತಾಂತ್ರಿಕ,  ಎಮೋಷನಲ್ ದೃಢತೆ ಹೆಚ್ಚಿಸುವ ಮೂಲಕ , ಅವರ ಕಾರ್ಯ ಕ್ಷಮತೆ ಹೆಚ್ಚಿಸಲು ಸಹ ವಿಶೇಷ ತರಬೇತಿ ನೀಡಲಾಗುತ್ತದೆ. ಕರಾವಳಿಯ ರಕ್ಷಣೆಗೆ 3 ಹೊಸ ಜೆಟ್ ಸ್ಕೀ ಗಳನ್ನು ಶೀಘ್ರದಲ್ಲಿ ಸರಬರಾಜು ಮಾಡಲಾಗುವುದು ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಆಂತರಿಕ ಭದ್ರತೆಗೆ ಅಡ್ಡಿಪಡಿಸುವವರನ್ನು, ಇಲಾಖೆಯ ಸೋಷಿಯಲ್ ಮೀಡಿಯಾ ಸೆಲ್ ಮೂಲಕ ಪತ್ತೆ ಮಾಡಿ, ಕ್ರಮ ಕೈಗೊಳ್ಳಲಾಗುವುದು , ದೇಶವಿರೋಧಿ ಚಟುವಟಿಕೆ ನಡೆಸುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗುವವರು ಮತ್ತು ಬರುವವರ ಖಚಿತ ಮಾಹಿತಿಗಾಗಿ ಚಿಪ್ ಆಧಾರಿತ ತಂತ್ರಜ್ಞಾನ ಬಳಕೆ ಮಾಡಲಾಗುವುದು.ಮೀನುಗಾರರ ರಕ್ಷಣೆಗೆ ಜೊತೆಗೆ ಸಮುದ್ರದದಲ್ಲಿನ ಜೀವ ವೈವಿಧ್ಯ ರಕ್ಷಣೆಗೆ ಸಹ ಅಗತ್ಯ ಕ್ರಮ ಕೈಗೊಳ್ಳಲಾಗುವುದು.ರಾಜ್ಯದಲ್ಲಿನ 43 ಬೀಚ್ ಗಳಿಗೆ ಸೂಕ್ತ ಭದ್ರತೆ ನೀಡುವುದರ ಮೂಲಕ ರಾಜ್ಯದ 322 ಕಿಮೀ ವ್ಯಾಪ್ತಿಯ ಕರಾವಳಿಯಲ್ಲಿ ಆಂತರಿಕ ಭದ್ರತೆ ಮಾಡಲಾಗುವುದು.ಈಗಾಗಲೇ ಕರಾವಳಿ ಕಾವಲು ಪಡೆಯ ಜೊತೆಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಒಳಗೊಂಡ ಕರಾವಳಿ ನಿಯಂತ್ರಣ ದಳ ಹಾಗೂ ಸ್ಥಳಿಯ ಮೀನುಗಾರರನ್ನು ಒಳಗೊಂಡ ಸಾಗರ ರಕ್ಷಕದಳವನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ಉಪಸ್ಥಿತರಿದ್ದರು.