ಅಕ್ರಮ ಮೀನುಗಾರಿ‌ಕೆ‌ ನಿಷೇಧಕ್ಕೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ:‌ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಅಕ್ರಮ ಮೀನುಗಾರಿಕೆ ನಿಷೇಧ ಆದೇಶವನ್ನು‌ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಲ್ಪೆ ಡೀಪ್‌ ಸೀ ಟ್ರಾಲ್‌ ಬೋಟ್‌ ಅಸೋಸಿಯೇಶನ್‌ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಅವೈಜ್ಞಾನಿಕ ಬೆಳಕು ಮತ್ತು ಬುಲ್‍ಟ್ರಾಪ್‌ ಮೀನುಗಾರಿಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೂ ಅಕ್ರಮ ಮೀನುಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ತಡೆಯೊಡುತ್ತಿಲ್ಲ. ಇದರಿಂದ ಮತ್ಸ್ಯಕ್ಷಾಮ ಉಂಟಾಗಿ ರಾಜ್ಯದ 18 ಸಾವಿರ ನಾಡದೋಣಿ ಮೀನುಗಾರರು ಮತ್ತು 4,500 ಯಾಂತ್ರೀಕೃತ ಬೋಟ್‌ ಮೀನುಗಾರರು ತುಂಬಾ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಕೂಡಲೇ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಿ ಅಕ್ರಮ ಮೀನುಗಾರಿಕೆಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಅವೈಜ್ಞಾನಿಕ ಬೆಳಕು ಮತ್ತು ಬುಲ್‍ಟ್ರಾಪ್‌ ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡದಿದ್ದರೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮೀನುಗಾರ ಮುಖಂಡರು ಎಚ್ಚರಿಕೆ ನೀಡಿದರು.