ಉಡುಪಿ: ಜ. 12ಕ್ಕೆ ಜಿಲ್ಲಾಮಟ್ಟದ ಬಿಜೆಪಿ ಜನಸೇವಕ ಸಮಾವೇಶ

ಉಡುಪಿ: ಮುಂಬರುವ ಜಿಪಂ, ತಾಪಂ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ‘ಜನ ಸೇವಕ ಸಮಾವೇಶ’ ಜನವರಿ 12ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಪುತ್ತೂರು-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಬಗ್ಗೆ ಶನಿವಾರ ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಜನಸೇವಕ ಸಮಾವೇಶದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ಈರಣ್ಣ ಕಡಾಡಿ ಸಹಿತ ಜಿಲ್ಲೆಯ ಸಂಸದರು, ಸಚಿವರು, ಶಾಸಕರು
ಪಕ್ಷದ ಮುಖಂಡರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಿಗಮ-ಮಂಡಳಿ ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು ಹಾಗೂ ನೂತನ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಈ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸ್ಪರ್ಧಿಸಿರುವ 2,351 ಅಭ್ಯರ್ಥಿಗಳಲ್ಲಿ 1,495 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿದ್ದಾರೆ. ಜಿಲ್ಲೆಯ 153 ಗ್ರಾಮ ಪಂಚಾಯತ್‍ಗಳಿಗೆ ನಡೆದ ಚುನಾವಣೆಯಲ್ಲಿ 115 ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಜಿಲ್ಲೆಯಾದ್ಯಂತ 63% ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಆಯ್ಕೆಯಾಗಿದ್ದು, 75%ಕ್ಕೂ ಮಿಕ್ಕಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಗ್ರಾಮ ಪಂಚಾಯತ್ ಚುನಾವಣೆಯ ಈ ಪ್ರಚಂಡ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ಉಪಸ್ಥಿತರಿದ್ದರು.