ಉಡುಪಿ: ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ.ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಕನ್ನಡ ಸಿನಿಮಾ ಮೇ 30ರಿಂದ ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿನಿಮಾದ ನಿರ್ಮಾಪಕ ಕೆ. ಸತ್ಯೇಂದ್ರ ಪೈ ಅವರು, ಈ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ, ಶೈಕ್ಷಣಿಕ ಬದುಕು ಮತ್ತು ಮಕ್ಕಳಲ್ಲಿ ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವ ಕಥಾವಸ್ತುವನ್ನು ಹೊಂದಿದೆ. ಗಂಭೀರ ಕತೆಯನ್ನು ಹಾಸ್ಯದ ಲೇಪನದೊಂದಿಗೆ ಪ್ರೇಕ್ಷಕರಿಗೆ ಉಣಬಡಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಇದು ಶಾಲಾ ಚುನಾವಣೆಯನ್ನು ಆಧರಿಸಿದ ಕಥೆಯಾದುದರಿಂದ ಇಡೀ ಸಿನಿಮಾವನ್ನು ಕಟಪಾಡಿಯ ಒಂದೇ ಶಾಲೆಯಲಿ, ಚಿತ್ರೀಕರಿಸಲಾಗಿದೆ. ಸುಮಾರು 25 ಶಾಲೆಯ 120 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚಿತ್ರದಲ್ಲಿ ಅಭಿನಯಿಸಿರುವುದು ವಿಶೇಷ ಎಂದರು.
ಈ ಹಿಂದೆ ಬಿಡುಗಡೆಗೊಂಡು ಯಶಸ್ವಿಯಾದ ಪೆನ್ಸಿಲ್ ಬಾಕ್ಸ್ ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು ಅವರು, ಈ ಚಿತ್ರಕ್ಕೆ ಕಥೆ, ಚಿತ್ರ ಕಥೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರದ ಛಾಯಾಗ್ರಾಹಕರಾಗಿ ಮೋಹನ್ ಪಡ್ರೆ, ಜಯಕಾರ್ತಿ ಸಂಗೀತ ನೀಡಿದ್ದಾರೆ. ಸಚಿನ್ ರಾಮ್ ಸಂಕಲನ, ಆಶಿಶ್ ಅಂಚನ್ ನೃತ್ಯ ನಿರ್ದೇಶನ ಮತ್ತು ಅಕ್ಷತ್ ವಿಟ್ಲ ಸಹ ನಿರ್ದೇಶಕರಾಗಿದ್ದು ಸುದರ್ಶನ್ ಶಂಕರ್ ಹಾಗೂ ಎಂ ಎಂ ವಿಮಲ್ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ತುಳು ಚಿತ್ರ ರಂಗದ ದಿಗ್ಗಜರಾದ ಅರವಿಂದ್ ಬೋಳಾರ್, ಬೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ ಹೊಸ ಬಗೆಯ ಹಾಸ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಕನ್ನಡದ ಹಿರಿಯ ನಟ ರಮೇಶ್ ಭಟ್ ಗಂಭೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ನಿರ್ಮಾಣದ ಮೇಲ್ವಿಚಾರಣೆಯ ಜೊತೆಗೆ ವಿಶೇಷ ಪಾತ್ರವೊಂದಲ್ಲಿ ಮೂರು ಮುತ್ತು ನಾಟಕ ಖ್ಯಾತಿಯ ನಾಗೇಶ್ ಕಾಮತ್ ಕಟಪಾಡಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಟ ಕೆ. ನಾಗೇಶ್ ಕಾಮತ್, ಚಿತ್ರ ಸಂಘಟಕ ಗಣೇಶ್ ಕಿಣಿ, ನಟಿ ಅಶ್ವಿನಿ, ಬಾಲನಟರಾದ ಯಶಸ್ ಸುವರ್ಣ, ವೈಷ್ಣವಿ ಇದ್ದರು.












