ಉಡುಪಿ: ಕಾಂಗ್ರೆಸ್ ಮುಖಂಡ ಆಸ್ಕರ್‌ಗೆ ಬಿಜೆಪಿಯಿಂದ ಶ್ರದ್ಧಾಂಜಲಿ

ಉಡುಪಿ: ಅಗಲಿದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನುಡಿನಮನ ಸಲ್ಲಿಸಲಾಯಿತು.

ಆಸ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಕೆ. ರಘುಪತಿ‌ ಭಟ್ ನುಡಿ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ವಿರೋಧ ಪಕ್ಷದ ನಾಯಕರು ಅಗಲಿದಾಗ ವಿರೋಧಿ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಸಂಪ್ರದಾಯ ಉಡುಪಿ ಜಿಲ್ಲೆಯಲ್ಲಿ ನಡೆದುಕೊಂಡು ಬಂದಿದೆ. ಇದೇ ರೀತಿ ಡಾ.ವಿ.ಎಸ್.ಆಚಾರ್ಯ ಅಗಲಿದಾಗ ಕಾಂಗ್ರೆಸ್ ಕಚೇರಿ ಯಲ್ಲಿಯೂ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಜಕಾರಣ ಎಂಬುದು ಚುನಾವಣೆಯಲ್ಲಿ ಮಾತ್ರ. ಅದರ ನಂತರ ವಿರೋಧಿ ಪಕ್ಷಗಳಾಗಿ ದ್ದರೂ ಪರಸ್ಪರ ಗೌರವ ಕೊಡುವ ಸಂಪ್ರಾದಯವನ್ನು ಬೆಳಿಸಿಕೊಂಡು ಬರುತ್ತಿದ್ದೇವೆ ಎಂದರು.

ಆಸ್ಕರ್ ಬಹಳ ದೊಡ್ಡ ಮಾನವೀಯ ಗುಣ ಹೊಂದಿರುವ ವ್ಯಕ್ತಿ. 2008ರಲ್ಲಿ ನನ್ನ ಕುಟುಂಬದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕೆಲವು ಮಂದಿ ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದರು. ಅಂತಹ ಸಂಕಷ್ಟದ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್ ನನ್ನನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ್ದರು. ಅಲ್ಲದೆ, ಏನಾದರೂ ಸಹಾಯ ಬೇಕ ಎಂದು ಕೂಡ ಕೇಳಿದ್ದರು. ಇದು ಅವರ ಬಹಳ ದೊಡ್ಡ ಮಾನವೀಯ ಗುಣ ಎಂದು ಬಣ್ಣಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿ ಅಮೀನ್, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಮೊದಲಾದವರು ಉಪಸ್ಥಿತರಿದ್ದರು.