ಉಡುಪಿ:ಅಂತರ್ಜಲ ವೃದ್ಧಿಗೆ ಮಳೆ ನೀರಿನ ಕೊಯ್ಲು ಆಶಯ- ಇದಕ್ಕೆ ಒತ್ತು ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ


ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅವಶ್ಯ.ಸರಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ
ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ ಅಂತರ್ಜಲದ ಮಟ್ಟ ನಿರೀಕ್ಷಿತ ಮಟ್ಟಕ್ಕಿಂತ ಕೆಳಭಾಗದಲ್ಲಿದೆ. ಹೆಚ್ಚು ಮಳೆಯಾದರೂ
ನೀರು ಸರಾಗವಾಗಿ ಪಶ್ಚಿಮಾಭಿಮುಖವಾಗಿ ಹರಿದು ಸಮುದ್ರವನ್ನು ಸೇರುತ್ತಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಿಂದಾಗಿ ಮೇಲ್ಮಣ್ಣು ಕೊಚ್ಚಿಹೋಗಿ ಲ್ಯಾಟರೈಟ್ ಸಾಯ್ಲ್ ಆಗಿದೆ. ನೀರು ಇಂಗುವ ಪ್ರಮಾಣ ಕಡಿಮೆ. ಮಳೆ ನೀರು ಕೊಯ್ಲು ಅಳವಡಿಸುವುದರಿಂದ ಇಂಗು ವಿಕೆಯನ್ನು ಹೆಚ್ಚಿಸಲು ಸಾಧ್ಯ. ಇದರಿಂದ ಅಂತರ್ಜಲವೃದ್ಧಿಯಾಗುತ್ತದೆ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದರು.

ಜಿಲ್ಲೆಯಲ್ಲಿ ರೈತರು ಹಾಗೂ ಖಾಸಗಿ ಯವರು ಹೆಚ್ಚು ಮಳೆ ನೀರು ಕೊಯ್ಲುಗಳನ್ನು ಅಳವಡಿಸಿದ್ದಾರೆ. ಆದರೆ ಸರ್ಕಾರದ ನೀರಿನ ಮೂಲಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನೀರು ಕೊಯ್ಲು ಅಳವಡಿಸಿರುವುದು ಕಂಡುಬಂದಿದೆ. ಕಳೆದ ಸಾಲಿನಲ್ಲಿ ಈ ಬಗ್ಗೆ ಕಾರ್ಯಪ್ರವೃತ್ತರಾಗಲು ಸೂಚಿಸಿದರೂ ಸಹ ಪ್ರಗತಿ ಸಾಧಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಒಟ್ಟು ಬಾವಿಗಳಲ್ಲಿ ಶೇ. 50 ಕ್ಕೆ ಮಳೆ ನೀರು ಕೊಯ್ಲು ಅಳವಡಿಸಲು ಸೂಚನೆ ನೀಡಿದರು.

ಮಳೆ ನೀರು ಕೊಯ್ಲು ಅಳವಡಿಸಲು ಗ್ರಾಮ ಪಂಚಾಯತ್‌ಗಳ 15 ನೇ ಹಣಕಾಸು ಅನುದಾನವನ್ನು ಹಾಗೂ ಟಾಸ್ಕ್ ಫೋರ್ಸ್ನ
ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬರ ಪೀಡಿತ ಪ್ರದೇಶಗಳಲ್ಲಿ, ನೀರಿನ ಸಮಸ್ಯೆ ಉಂಟಾದ ಗ್ರಾಮಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಸುವ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.
ಮಳೆ ನೀರು ಕೊಯ್ಲು ಅಳವಡಿಕೆಯಿಂದ ಸಾಮಾನ್ಯವಾಗಿ ಅಂತರ್ಜಲ ವೃದ್ಧಿಯಾಗುತ್ತದೆ. ಇವುಗಳ ಅಳವಡಿಕೆಯಿಂದ ಭವಿಷ್ಯದಲ್ಲಿ ವಾಡಿಕೆಯ ಮಳೆ ಆಗದೇ ಬರ ಪರಿಸ್ಥಿತಿ ಉಂಟಾದಲ್ಲಿ ಸಹ ಟ್ಯಾಂಕರ್ ಮೂಲಕ ನೀರನ್ನು ಕೊಡುವುದನ್ನು ತಪ್ಪಿಸಲು ಸಾಧ್ಯ ಎಂದ ಅವರು, ಕೆಲವು ಬೋರ್‌ಗಳಲ್ಲಿ ಉಪ್ಪು ನೀರು ಬಂದರೂ ಸಹ ಮಳೆ ನೀರು ಕೊಯ್ಲು ಅಳವಡಿಕೆಯಿಂದ ಸಿಹಿ ನೀರು ವೃದ್ಧಿಗೊಳ್ಳುತ್ತದೆ
ಎಂದರು.

ಜಿಲ್ಲೆಯಲ್ಲಿ ಒಟ್ಟು 1616 ಸರ್ಕಾರಿ ತೆರೆದ ಹಾಗೂ ಕೊಳವೆ ಬಾವಿಗಳು ಇದ್ದು, ಆದರೆ ಕೇವಲ 44 ಕ್ಕೆ ಮಾತ್ರ ಮಳೆ ನೀರು ಕೊಯ್ಲು ಅಳವಡಿಕೆಯಾಗಿದೆ. ಬಾಕಿ ಉಳಿದ 1572 ಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ ಕಾರ್ಯವನ್ನು ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ವಿವಿಧ ಜಿಲ್ಲಾ
ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಇ.ಓಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.