ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.

ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್‌ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು ನೀರಿನ ಸಮರ್ಪಕ ಪೂರೈಕೆಗೆ ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಶೋಧಕ್ಕೆ ಕ್ರಮಕೈಗೊಳ್ಳಲು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಮತ್ತು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಬೈಂದೂರು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭಾರತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಬಿ.ಟಿ.ಮೋಹನ್, ತಹಸೀಲ್ದಾರ್ ಶೋಭಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.