ಭೂಕುಸಿತದಂತಹ ದುರಂತಕ್ಕೆ ಪರಿಸರದ ಮೇಲಿನ ನಿರಂತರ ದಾಳಿಯೇ ಕಾರಣ

ಉಡುಪಿ: ಪ್ಲ್ಯಾಸ್ಟಿಕ್ ಬಳಕೆಯಿಂದ ಜನರ‌ ಆರೋಗ್ಯ ಹಾಗೂ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿವೆ. ಹೀಗಾಗಿ ಮರುಬಳಕೆಗೆ ಯೋಗ್ಯವಾದ ಪ್ಲ್ಯಾಸ್ಟಿಕ್ ಅನ್ನು ಮಾತ್ರ ಬಳಸಬೇಕು. ಏಕಬಳಕೆಯ ಪ್ಲ್ಯಾಸ್ಟಿಕ್ ಅನ್ನು ಬಳಸಬಾರದು. ಪರಿಸರ ಸಂರಕ್ಷಣೆ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು‌ ಉದ್ಘಾಟಿಸಿ ಮಾತನಾಡಿದರು.

ಪ್ರಾಣಿ ಪಕ್ಷಿ, ಗಿಡ ಮರ, ಜಲ ಮೂಲಗಳನ್ನು ಸಂರಕ್ಷಣೆ ಮಾಡುವುದು ಅಗತ್ಯ. ಇಲ್ಲದಿದ್ದರೆ ಪರಿಸರದ ಅಸಮತೋಲನ ಉಂಟಾಗುತ್ತದೆ. ಪರಿಸರದ ಅಸಮತೋಲನ ಉಂಟಾದರೆ ಮನುಷ್ಯರು ಬದುಕಲು ಸಾಧ್ಯವಿಲ್ಲ. ಪರಿಸರದ ಬಗ್ಗೆ ನಿರ್ಲಕ್ಷ್ಯ ವಹಿಸಿ ಅದರ ಮೇಲೆ ನಿರಂತರ ದಾಳಿ ಮಾಡಿದ ಪರಿಣಾಮ ಭೂಕುಸಿತದಂತಹ ದುರಂತಗಳು ನಡೆಯುತ್ತಿವೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.