ಉಡುಪಿ: ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ನೆರವಾದ “ವೈದ್ಯರ ನಡೆ ಹಳ್ಳಿ ಕಡೆ“ ಕಾರ್ಯಕ್ರಮ

ಉಡುಪಿ: ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವ ಮೂಲಕ, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ..

ಜಿಲ್ಲೆಯಲ್ಲಿ ಅನುಷ್ಠಾನ ಮಾಡಿರುವ “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮಕ್ಕೆ ವೈದ್ಯರು, ಸ್ವಾಬ್ ಸಂಗ್ರಹಗಾರರು, ಗ್ರಾಮೀಣ ಕೋವಿಡ್ ಕಾರ್ಯಪಡೆಯ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ 73 ತಂಡಗಳನ್ನು ರಚಿಸಿದ್ದು, ತಂಡದ ಎಲ್ಲಾ ಸದಸ್ಯರು ಒಟ್ಟಾಗಿ ಗ್ರಾಮಗಳಿಗೆ ತೆರಳಲು ಅನುಕೂಲವಾಗುವಂತೆ, ಎಲ್ಲಾ ತಂಡಗಳಿಗೆ ಜಿಲ್ಲಾಡಳಿತದ ಮೂಲಕ ಪ್ರತ್ಯೇಕ ವಾಹನ ವ್ಯವಸ್ಥೆ ಒದಗಿಸಲಾಗಿದ್ದು, ರೋಗ ಲಕ್ಷಣಗಳಿರುವವರನ್ನು ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸಲು ರ‍್ಯಾಟ್ ಕಿಟ್ ಗಳನ್ನು ಒದಗಿಸಿದ್ದು, ರ‍್ಯಾಟ್ ಪರೀಕ್ಷೆ ಮೂಲಕ ಸ್ಥಳದಲ್ಲೇ ಸೋಂಕಿತರನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ.

ಜೂನ್ 10 ರ ವರೆಗೆ ಉಡುಪಿ ತಾಲೂಕಿನ 439 ಗ್ರಾಮಗಳಿಗೆ ಭೇಟಿ ನೀಡಿರುವ ಈ ತಂಡವು 12826 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, 912 ಐಎಲ್‌ಐ ಸಾರಿ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 70 ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಹಾಗೂ 21 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ, 2990 ರ‍್ಯಾಟ್ ಮತ್ತು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಿ 205 ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಹಚ್ಚಿದೆ.

ಕುಂದಾಪುರ ತಾಲೂಕಿನ 439 ಗ್ರಾಮಗಳಿಗೆ ಭೇಟಿ ನೀಡಿರುವ ಈ ತಂಡವು 10280 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, 736 ಐಎಲ್‌ಐ ಸಾರಿ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 47 ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಹಾಗೂ 5 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ, 7156 ರ‍್ಯಾಟ್ ಮತ್ತು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಿ 382 ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಹಚ್ಚಿದೆ.

ಕಾರ್ಕಳ ತಾಲೂಕಿನ 296 ಗ್ರಾಮಗಳಿಗೆ ಭೇಟಿ ನೀಡಿರುವ ಈ ತಂಡವು 11613 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, 894 ಐಎಲ್‌ಐ ಸಾರಿ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 19 ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಹಾಗೂ 4 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ, 7959 ರ‍್ಯಾಟ್ ಮತ್ತು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಿ 167 ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಹಚ್ಚಿದೆ.

ಒಟ್ಟಾರೆ ಜಿಲ್ಲೆಯಲ್ಲಿ 1174 ಗ್ರಾಮಗಳಿಗೆ ಭೇಟಿ ನೀಡಿರುವ ಈ ತಂಡವು 34719 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, 2542 ಐಎಲ್‌ಐ ಸಾರಿ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 136 ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಹಾಗೂ 30 ಮಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿದೆ, 18105 ರ‍್ಯಾಟ್ ಮತ್ತು ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಿ 754 ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಿದೆ.

ಜಿಲ್ಲೆಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ನಿಯೋಜಿಸಿರುವ ತಂಡದ ಎಲ್ಲಾ ಸದಸ್ಯರುಗಳು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶದ ಪ್ರತೀ ಮನೆಗೆ ಭೇಟಿ ನೀಡುತ್ತಿರುವ ತಂಡವು, ಪ್ರತೊಯೊಬ್ಬರ ಆರೋಗ್ಯ ಪರಿಶೀಲನೆ ನಡೆಸುತ್ತಿದು, ಕೋವಿಡ್ ಸೋಂಕಿತರನ್ನು ಸ್ಥಳದಲ್ಲೇ ಪತ್ತೆ ಹಚ್ಚುವ ಜೊತೆಗೆ ಅವರ ಪ್ರಾಥಮಿಕ ಸಂಪರ್ಕಿತರನ್ನೂ ಗುರುತಿಸಿ ಅವರನ್ನೂ ಸಹ ಸ್ಥಳದಲೇ ಪರೀಕ್ಷೆಗೆ ಒಳಪಡಿಸುತ್ತಿದ್ದು, ಸೋಂಕಿತರನ್ನು ಹೋಂ ಐಸೋಲೇಶನ್, ಕೋವಿಡ್ ಕೇರ್ ಸೆಂಟರ್ ಅಥವಾ ಕೋವಿಡ್ ಆಸ್ಪತೆಗೆ ದಾಖಲಿಸುವ ಕುರಿತಂತೆ ತಕ್ಷಣದಲ್ಲಿ ತೀರ್ಮಾನ ಕೈಗೊಳ್ಳುತ್ತಿರುವ ಕಾರಣ, ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯವಲ್ಲಿ ಗಮನಾರ್ಹ ಸಾಧನೆ ಮಾಡಲಾಗಿದೆ. ಈ ತಂಡದ ಮೂಲಕ ಸೋಂಕು ತಡೆಗೆ ಅತ್ಯಗತ್ಯವಾಗಿ ಕೈಗೊಳ್ಳಬೇಕಾದ, ತ್ವರಿತಗತಿಯ ಟೆಸ್ಟಿಂಗ್, ಟ್ರೇಸಿಂಗ್ ಮತ್ತು ಟ್ರೀಟ್‌ಮೆಂಟ್ ನೀಡುವ ಸೂತ್ರವನ್ನು ಅತ್ಯಂತ ಯಶಸ್ವಿಯಾಗಿ ಪಾಲಿಸಲು ಸಾಧ್ಯವಾಗಿದೆ ಎನ್ನುತ್ತಾರೆ ಜಿಲ್ಲಾಧಿಕಾರಿ ಜಿ.ಜಗದೀಶ್.