ಉಡುಪಿ ಜಿಲ್ಲಾ ವಾರ್ತಾ ಕಚೇರಿಗೆ ಆಯುಕ್ತ ಡಾ. ಪಿ.ಎಸ್. ಹರ್ಷ ಭೇಟಿ

ಉಡುಪಿ: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್ ಹರ್ಷ ಅವರು ಇಂದು ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಕರ ಕಚೇರಿಗೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.

ವಾರ್ತಾ ಇಲಾಖೆಯು ಈ ಹಿಂದೆ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ಪಡಿಸುತ್ತಾ ಬಂದಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಕೊಂಡಿಯಾಗಿಯೂ ಕಾರ್ಯ ನಿರ್ವಹಿಸಬೇಕಾಗಿದೆ. ಅತ್ಯಂತ ಜವಾಬ್ದಾರಿಯುತವಾಗಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಕಚೇರಿ ಸಮಯದ ಹೊರತಾಗಿಯೂ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಇಂದಿನ ದಿನಗಳಲ್ಲಿ ಜನಸಾಮಾನ್ಯರು ಆಧುನಿಕ ಡಿಜಿಟಲ್ ಮಾಧ್ಯಮಗಳಿಗೆ ಮಾರು ಹೋಗುತ್ತಿರುವ ಹಿನ್ನಲೆಯಲ್ಲಿ ನಮ್ಮ ಇಲಾಖೆಯ ಸಾಂಪ್ರದಾಯಿಕ ಸುದ್ದಿ ಹಾಗೂ ಸರ್ಕಾರದ ಕಾರ್ಯಕ್ರಮಗಳ ಪ್ರಚಾರದ ಜೊತೆಗೆ ಸಾಮಾಜಿಕ ಮಾಧ್ಯಮಗಳ ಮೂಲಕವೂ ಪ್ರಚಾರ ಪಡಿಸಬೇಕು ಎಂದರು.

ಕಚೇರಿಯಲ್ಲಿ ಯಾವುದೇ ರೀತಿಯ ಕಾರ್ಯಗಳನ್ನು ನಿರ್ವಹಿಸುವಾಗ ನಿಖರ ಮಾಹಿತಿಯನ್ನು ತಪ್ಪದೇ ನಮೂದು ಮಾಡಬೇಕು. ತಪ್ಪಿದಲ್ಲಿ ಅವು ಮುಂದಿನ ದಿನಗಳಲ್ಲಿ ಸಮಸ್ಯೆಯೊಡ್ಡುವ ಸಾಧ್ಯತೆಗಳಿದ್ದು, ಇದಕ್ಕೇ ಆಸ್ಪದ ನೀಡಬಾರದು ಎಂದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಉಪಸ್ಥಿತರಿದ್ದರು.