ಉಡುಪಿ‌ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಅಗ್ರಸ್ಥಾನ.!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ‌ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ, ಜಿಲ್ಲೆಯ ಹೊರಭಾಗಗಳಿಂದಲೂ ಬಂದು ಇಲ್ಲಿ ವ್ಯಾಸಾಂಗ ಮಾಡುತ್ತಾರೆ. ಹಲವು ವರ್ಷಗಳಿಂದ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಎರಡು ಸ್ಥಾನ ಕಾಯ್ದುಕೊಂಡಿರುವ ಉಡುಪಿ‌ ಜಿಲ್ಲೆಯ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆ ಅಗ್ರಸ್ಥಾನ ಪಡೆಯಲು ಕಾರಣಿಭೂತರಾದ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರಿಗೆ, ಎಲ್ಲಾ‌ ಕಾಲೇಜುಗಳಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.