ಉಡುಪಿ:ನಾಗರಿಕರ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ : ಟಿ.ಶ್ಯಾಮ್ ಭಟ್

ಉಡುಪಿ: ನಾಗರಿಕರಿಗೆ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಮಾಡುವುದು ಸರಕಾರಿ ಅಧಿಕಾರಿಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಾನವಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.

ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಬೆಂಗಳೂರು ಇವರ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣಗಳ ವಿಲೇವಾರಿ,ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸರಕಾರಿ ಅಧಿಕಾರಿಗಳು ಮಾನವ ಹಕ್ಕುಗಳ ಸಂರಕ್ಷಣಾ ಅಧಿಕಾರಿಗಳಾಗಿದ್ದು, ಜನಸಾಮಾನ್ಯರ ಮಾನವ ಹಕ್ಕುಗಳಿಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಅಹವಾಲುಗಳನ್ನು ಇಲಾಖಾ ಅಧಿಕಾರಿಗಳ ಮುಂದೆ ತಂದಾಗ ಅವರೊಂದಿಗೆ ಸೌಜನ್ಯ ಹಾಗೂಸಂಯಮದೊಂದಿಗೆ ನಡೆದು, ದೂರುಗಳನ್ನು ಆಲಿಸಿ, ನಿಯಮಾನುಸಾರ ಅವುಗಳನ್ನು ಬಗೆಹರಿಸಲು ಮುಂದಾಗಬೇಕೆ೦ದರು.

ಸಾರ್ವಜನಿಕರು ತಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಆದಾಗ ಆಯೋಗದ ಮುಂದೆ ದೂರುಗಳನ್ನು ಸಲ್ಲಿಸುತ್ತಾರೆ. ದೂರುಗಳಿಗೆ ಸಂಬಂಧಿಸಿದಂತೆ ವರದಿಯನ್ನು ನೀಡಲು ನೋಟಿಸ್ ನೀಡುತ್ತೇವೆ. ಅವುಗಳನ್ನು ಸಕಾಲದಲ್ಲಿ ನೀಡಬೇಕು. ಇವುಗಳನ್ನು ಪರಿಶೀಲಿಸಿದಾಗ ಒಂದೊಮ್ಮೆ ತಪ್ಪುಮಾಡಿರುವುದು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸರಕಾರಕ್ಕೆ ಶಿಫಾರಸ್ಸುಮಾಡಲಾಗುವುದು. ಕೆಲವೊಂದು ಗಂಭೀರ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ಸಹ ಶಿಫಾರಸ್ಸು ಮಾಡಲಾಗುವುದು ಎಂದರು.

ಆಯೋಗದ ಸದಸ್ಯ ಎಸ್.ಕೆ ವಂಟಿಗೋಡಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಹುಟ್ಟಿನಿಂದಲೇ ನೈಸರ್ಗಿಕವಾಗಿ ಮಾನವ ಹಕ್ಕುಗಳನ್ನು ಪಡೆದಿರುತ್ತಾನೆ.ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತವಾಗಿ ಬದುಕುವ ಹಕ್ಕು ಇದೆ. ಇವುಗಳು ಉಲ್ಲಂಘನೆ ಆದ ಸಂದರ್ಭದಲ್ಲಿ ಅವುಗಳನ್ನು ಪ್ರಶ್ನಿಸುವ ಹಕ್ಕು ಸಹ ಇದೆ ಎಂದರು.

ಸರಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುತ್ತದೆ. ಇವುಗಳು ಅರ್ಹರಿಗೆ
ತಲುಪುವಂತಾಗಬೇಕು. ಇವು ಅನರ್ಹರಿಗೆ ತಲುಪದಂತೆ ಎಚ್ಚರಿಕೆ ವಹಿಸಬೇಕು ಎಂದ ಅವರು, ಒಂದೊಮ್ಮೆ ಕಾನೂನಿನ ಅಡಿಯಲ್ಲಿ ಸೇವೆಗಳನ್ನು ಪಡೆಯಲು ಹಕ್ಕು ಹೊಂದಿದ್ದು, ಅವುಗಳನ್ನು ನೀಡಲು ವಿಳಂಬ ಮಾಡುವುದು ಸಹ ಈ ಕಾನೂನಿನ ಉಲ್ಲಂಘನೆಯಾಗಿದೆ ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯು ಭೌಗೋಳಿಕವಾಗಿ ಇತರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ವ್ಯತ್ಯಾಸವಿದೆ. ಸರಕಾರದ ಕೆಲವು ಯೋಜನೆ, ಕಾರ್ಯಕ್ರಮಗಳು ಹಾಗೂ ನಿಯಮಾವಳಿಗಳ ಅನುಷ್ಠಾನಗೊಳಿಸಲು ಕೆಲವೊಂದು ಮಾರ್ಪಾಡುಗಳು ಹಾಗೂ ವಿನಾಯಿತಿಗಳು ನೀಡುವುದು ಅವಶ್ಯವಿದೆ.ಜಿಲ್ಲೆಯಲ್ಲಿ ಹೆಚ್ಚಿನ ಇಲಾಖೆಗಳಲ್ಲಿ ಸಿಬ್ಬಂದಿಯ ಕೊರತೆಗಳು ಇವೆ. ಈ ಹಿಂದೆ 3 ತಾಲೂಕು ಇದ್ದ ಉಡುಪಿ ಜಿಲ್ಲೆಯು ಪ್ರಸ್ತುತ 7 ತಾಲೂಕಾಗಿ ಮಾರ್ಪಟ್ಟಿದ್ದರೂ ಸಹ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮವಾಗಿ ತಮ್ಮ ಕರ್ತವ್ಯಗಳನ್ನು ಎಲ್ಲಾ ಇಲಾಖೆಗಳಲ್ಲಿ ನಿರ್ವಹಿಸುತ್ತಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲಿಸ್ ಅಧೀಕ್ಷಕ ಹರಿರಾಂ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ವೈಲ್ಡ್ಲೈಫ್ ಡಿ.ಎಫ್.ಓ ಶಿವರಾಂ ಎಂ ಬಾಬು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.