ಉಡುಪಿ: ಚೂರಿ ಇರಿತ ಪ್ರಕರಣ: ಯುವತಿ ಮೃತ್ಯು, ಯುವಕ ಗಂಭೀರ

ಉಡುಪಿ: ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಯುವಕ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾದ ಯುವತಿ. ಕೊಲೆಗೈದ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಸಂದೇಶ ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕಿನ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಸಂದೇಶ್ ಕುಲಾಲ್ ಉಡುಪಿಯ ಐಡಿಯಲ್ ಮೆಡಿಕಲ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

ಇವರಿಬ್ಬರು ಕಳೆದ ಏಳೆಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತೆಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ಸಂದೇಶ ಕುಲಾಲ್ ಈ ಕೃತ್ಯ ಎಸಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.