ರಾಷ್ಟಮಟ್ಟದ ಪ್ರತಿಭೆಗಳು ಬೆಳೆಯಲಿ: ರಘುಪತಿ ಭಟ್

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಕ್ರೀಡಾಪಟುಗಳ ಸಾಧನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳು ಲಭ್ಯವಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತಹ ಕ್ರೀಡಾಪಟುಗಳು , ಜಿಲ್ಲೆಯಿಂದ ಹೊರಹೊಮ್ಮಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಅವರು ಮಂಗಳವಾರ, ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ನಡೆದ, ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಪಟುಗಳು ನಿರಂತರವಾಗಿ ಅಭ್ಯಾಸ ಮಾಡುವುದರ ಜೊತೆಗೆ, ಕ್ರೀಡೆಯಲ್ಲಿ ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು, ಇತರೆ ಸ್ಥಳಗಳಲ್ಲಿ ನಡೆಯುವ ಕ್ರೀಡಾಕೂಟಗಳನ್ನು ವೀಕ್ಷಿಸಿ ಅಲ್ಲಿನ ಕ್ರೀಡಾಪಟುಗಳಲ್ಲಿನ ತಂತ್ರಗಳನ್ನು ತಮ್ಮಲ್ಲಿ ಸಹ ಅಳವಡಿಸಿಕೊಳ್ಳುವ ಮೂಲಕ ಪ್ರೇರಣೆ ಪಡೆಯಬೇಕು, ಉಡುಪಿ ಜಿಲ್ಲೆಯಲ್ಲಿ ಕ್ರೀಡಾಪಟುಗಳ ಸಾಮಥ್ರ್ಯ ಬೆಳವಣಿಗೆಗೆ ಉತ್ತಮ ಅವಕಾಶ ಹಾಗೂ ಸೌಲಭ್ಯಗಳು ಇವೆ ,  ಇವುಗಳ ಸದುಪಯೋಗ ಪಡೆದು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ತೋರಬೇಕು ಎಂದು ಶಾಸಕರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಸದಸ್ಯ ಉದಯ ಕೋಟ್ಯಾನ್, ಮಾಜಿ ನಗರಸಭಾ ಸದಸ್ಯ ಮಹೇಶ್ ಠಾಕೂರ್ , ಕ್ರೀಡಾ ತರಬೇತುದಾರ ರಾಮಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ  ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು,  ರಾಜಶೇಖರ್ ನಿರೂಪಿಸಿದರು.