ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಡಿಸಿ ಜಗದೀಶ್

ಉಡುಪಿ: ಇಲ್ಲಿನ ಡಾ. ಟಿಎಂಎ ಪೈ ಕೋವಿಡ್ ದಾಖಲಾಗಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಈ ಸೋಂಕಿತ ಗರ್ಭಿಣಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಚಿಕಿತ್ಸೆ ನೀಡಲು ಅಸಾಧ್ಯವಾಗಿದ್ದು, ತಾಯಿ ಹಾಗೂ ಮಗುವನ್ನು ರಕ್ಷಿಸುವುದು ಬಹಳ ಕಷ್ಟವೆಂದು ತಿಳಿದಾಗ ಉಡುಪಿಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಸಿಎಂ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯ ಮೇರೆಗೆ ಈ ಪ್ರಕರಣವನ್ನು ಉಡುಪಿ ಜಿಲ್ಲಾಡಳಿತ ಸವಾಲಾಗಿ ಸ್ವೀಕರಿಸಿದ್ದು, ತಾಯಿ ಹಾಗೂ ಮಗುವಿಗೆ ಉತ್ತಮ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ಇಂದು ತಾಯಿ ಹಾಗೂ ಮಗುವನ್ನು ಸುರಕ್ಷಿತವಾಗಿಸಿ ಕೊರೊನಾ ಸೋಂಕಿನಿಂದ ಮುಕ್ತವಾಗಿಸಿ ಊರಿಗೆ ಕಳುಹಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಚಿಕಿತ್ಸೆ ನೀಡಿದ ಡಾ. ಟಿಎಂಎ ಪೈ ಆಸ್ಪತ್ರೆಯ ವೈದ್ಯರು ಹಾಗೂ ಆಡಳಿತ ವರ್ಗಕ್ಕೂ ಡಿಸಿ‌ ಅಭಿನಂದನೆ ಸಲ್ಲಿಸಿದ್ದಾರೆ.