ಉಡುಪಿ:ಲಿಖಿತ ಪರೀಕ್ಷೆ : ಪ್ರತಿಬಂಧಕಾಜ್ಞೆ ಜಾರಿ-ಡಾ. ಕೆ.ವಿದ್ಯಾಕುಮಾರಿ ಆದೇಶ.

ಉಡುಪಿ: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜೂನ್ 15 ರಿಂದ 17 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ
ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ
ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ, ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಭಂಧಿಸಲಾಗಿದೆ.

ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಮುಚ್ಚಬೇಕು. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀನ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಇನ್ನಿತರೆ ಯಾವುದೇ ವಸ್ತುಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಕೊಂಡೊಯ್ಯುವಂತಿಲ್ಲ. ಎಲ್ಲಾ ಪರೀಕ್ಷಾ ಸಿಬ್ಬಂದಿ ಹಾಗೂ
ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಿಗಧಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ನಿಷೇಧಾಜ್ಞೆ ಆದೇಶವು ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಜೂನ್ 15 ರಿಂದ 17 ರ ವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.