ಉಡುಪಿ ಜಿಲ್ಲೆಯಲ್ಲಿ ಯುವಜನತೆ ಉದ್ಯೋಗ ಪಡೆಯಲು ಪೂರಕ ವಾತಾವರಣವಿದೆ :ಸಂಸದೆ ಶೋಭಾ

ಕುಂದಾಪುರ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಉಡುಪಿ ಜಿಲ್ಲೆಗೆ ಒದಗಿಸಿದ್ದು, ಯುವಜನತೆ ಉದ್ಯೋಗ ಪಡೆಯಲು ಎಲ್ಲಾ ರೀತಿಯ ಪೂರಕ ವಾತಾವರಣ ಜಿಲ್ಲೆಯಲ್ಲಿದ್ದು, ಯುವ ಜನತೆ ಇದರ ಸದುಪಯೋಗ ಪಡೆಯುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಅವರು ಭಾನುವಾರ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಜಿಲ್ಲೆ ಮತ್ತು ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ), ಕೋಟ, ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ “ಭರವಸೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯ ಯುವ ಜನತೆ ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಜಿಟಿಟಿಸಿ ತರಬೇತಿ ಕೇಂದ್ರವನ್ನು ಉಪ್ಪೂರಿನಲ್ಲಿ ನಿರ್ಮಿಸಲಾಗುತ್ತಿದ್ದು, ಇಲ್ಲಿ ತರಬೇತಿ ಪಡೆದ ಪ್ರತಿಯೊಬ್ಬರಿಗೂ ೧೦೦% ಉದೋಗ ದೊರೆಯಲಿದೆ. ಮಣಿಪಾಲದಲ್ಲಿ ಪ್ರಾನ ಮಂಥ್ರಿ ಉದ್ಯೋಗ ಕೌಶಲ್ಯ ಕೇಂದ್ರ ತೆರೆದಿದ್ದು, ಇದರಲ್ಲಿ ಉದ್ಯೋಗ ಪಡೆಯಲು ಬೇಕಾದ ಅಗತ್ಯ ತರಬೇತಿ ಮತ್ತು ಮಾಹಿತಿ ನೀಡಲಾಗುತ್ತಿದೆ. ಇಂದ್ರಾಳಿ ರೈಲ್ವೆ ನಿಲ್ದಾಣ ಬಳಿ ರಾಮಕೃಷ್ಣ ಹೆಗಡೆ ಕೌಶಲ್ಯ ತರಬೇತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಜೆಮ್ಸ್ ಅಂಡ್ ಜ್ಯೂಯಲ್ಸ್ ತರಬೇತಿ ಕೇಂದ್ರ ಸಹ ಆರಂಭಗೊಂಡಿದ್ದು, ಈ ಭಾಗದ ಯುವಜನತೆಗೆ ಉದ್ಯೋಗ ಸೃಷ್ಠಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗಿದ್ದು, ಯುವ ಜನತೆ ಇದರ ಪ್ರಯೋಜನ ಪಡೆಯುವಂತೆ ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಯುವ ಜನತೆಯ ಗುರಿ ದೊಡ್ಡದಾಗಿರಬೇಕು. ಗುರಿ ದೊಡ್ಡದಾಗಿದ್ದರೆ ಅದನ್ನು ಸಾಧಿಸುವ ಪ್ರಯತ್ನ ಸಹ ದೊಡ್ಡದಾಗಿದ್ದು, ಇದರಿಂದ ದೊರೆಯುವ ಪ್ರತಿಫಲ ಸಹ ದೊಡ್ಡದಾಗಿರುತ್ತದೆ. ಉದ್ಯೋಗ ಮೇಳದಲ್ಲಿ ಉದ್ಯೋಗ ನೀಡುವ ಕಂಪೆನಿಗಳು ಉದ್ಯೋಗದೊಂದಿಗೆ  ತಮ್ಮ ಸಿಬ್ಬಂದಿಗಳ ಯೋಗಕ್ಷೆಮ ಸಹ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಉಡುಪಿ ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಕೋಟತಟ್ಟು ಗ್ರಾ.ಪಂ ಅಧ್ಯಕ್ಷ ರಘು ತಿಂಗಳಾಯ, ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್, ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಭಾಸ್ಕರ್ ಅಮೀನ್, ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ನಾವಡ, ಅದಾನಿ ಗ್ರೂಪ್ ನ ಸಿಇಓ ಕಿಶೋರ್ ಆಳ್ವ,  ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಕುಮಾರ್ ಕೋಟ ನಿರೂಪಿಸಿ, ವಂದಿಸಿದರು.