ನವದಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಪ್ರಧಾನ್, ಕಳೆದ ಹತ್ತು ದಿನಗಳಿಂದ ಏನೆಲ್ಲ ನಡೆಯಿತೋ ಅದನ್ನು ಕಂಡು ಬೇಸರವಾಗಿದೆ ಎಂದಿದ್ದಾರೆ.
‘ಮೊದಲ ದಿನದಿಂದಲೇ ನಾನು ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ಈ ಸವಾಲಿನ ಪರಿಸ್ಥಿತಿಯಿಂದ ಹಿಂದೆ ಸರಿದಿಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
‘ಜಂತರ್ ಮಂತರ್ ಹಾಗೂ ದೇಶದಾದ್ಯಂತ ದೇಶ ವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯುವಂತಾಗಬಾರದು’ ಎಂದೂ ಹೇಳಿದ್ದಾರೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಬಳಿಕ, ಜೂನ್ 21ರಂದು ಮರುಪರೀಕ್ಷೆಯೂ ನಡೆದಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಮನನೊಂದು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ವಿಚಾರವನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ), ಜೂನ್ 20ರಿಂದ ಪ್ರತಿಭಟನೆ ಆರಂಭಿಸಿತ್ತು. ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ, ಪ್ರಕರಣದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತ್ತು.
ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಜುಲೈ 20ರಂದು ನಡೆದ ‘ಸಂಸತ್ ಚಲೊ’ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಅಶ್ರುವಾಯು ಶೆಲ್ಗಳನ್ನೂ ಪ್ರಯೋಗಿಸಿದ್ದರು. ನೂರಾರು ವಿದ್ಯಾರ್ಥಿಗಳು ಗಾಯಗೊಂಡು, 80ಕ್ಕೂ ಹೆಚ್ಚು ಪೊಲೀಸರು ಪೆಟ್ಟಾಗಿದೆ ಎಂದು ವರದಿಯಾಗಿತ್ತು.
ವಿವಿಧ ರಾಜಕೀಯ ಪಕ್ಷಗಳೂ ಪ್ರತಿಭಟನೆಗೆ ಧುಮುಕಿರುವುದರಿಂದ, ಸರ್ಕಾರದ ಮೇಲಿನ ಒತ್ತಡವೂ ಹೆಚ್ಚಾಗಿದೆ.















