ಕೋಟೇಶ್ವರ: ನಿರುಪಯುಕ್ತ ನೀರಿನ ಟ್ಯಾಂಕ್ ತೆರವು

ಕುಂದಾಪುರ: ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಟ್ಯಾಂಕ್‌ ಅನ್ನು ತೆರವುಗೊಳಿಸುವ ಕಾರ್ಯಾಚರಣೆ ಮಂಗಳವಾರ ನಡೆಯಿತು.

ಕೋಟೇಶ್ವರ ಗ್ರಾಪಂ ಎದುರಿನ ಗ್ರಾಮಲೆಕ್ಕಿಗರ ಕೊಠಡಿ ಹಿಂಭಾಗದಲ್ಲಿ 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಹೆಡ್‌ಟ್ಯಾಂಕ್‌ನಲ್ಲಿ ಸೋರಿಕೆ ಕಂಡುಬಂದಿದ್ದರಿಂದ ಕಳೆದ ಹದಿನೈದು ವರ್ಷಗಳಿಂದ ಯಾವುದೇ ಉಪಯೋಗ ಇಲ್ಲದೆ ನಿರುಪಯುಕ್ತವಾಗಿತ್ತು. ಟ್ಯಾಂಕ್ ಶಿಥಿಲಗೊಂಡಿದ್ದು ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಪಂ ಕಟ್ಟಡ ಸಹಿತ ಇತರೆ ಅಂಗಡಿಗಳಿಗೆ ಅಪಾಯ ಆಹ್ವಾನಿಸುತ್ತಿತ್ತು. ಟ್ಯಾಂಕ್ ತೆರವಿನ ಬಗ್ಗೆ ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯಿಂದ ಸಾಮರ್ಥ್ಯ ವರದಿ ಪಡೆದು ಟ್ಯಾಂಕ್ ಕೆಡವಲು ದಿನ ನಿಗದಿ ಮಾಡಿದ್ದರು.

ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಸಂಚಾರಿ ಠಾಣೆ, ಆರೋಗ್ಯ ಇಲಾಖೆ, ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಓವರ್ ಹೆಡ್ ಟ್ಯಾಂಕ್ ತೆರವು ಕಾರ್ಯಾಚರಣೆ ಸಾಂಗವಾಗಿ ನಡೆಯಿತು. ಸುರತ್ಕಲ್ ನ 15 ರಿಂದ 20 ಮಂದಿಯ ತಂಡವು ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿತ್ತು.

ಈ ಸಂದರ್ಭದಲ್ಲಿ ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಕೋಟೇಶ್ವರ ಗ್ರಾಪಂ ಅಧ್ಯಕ್ಷ ಕೃಷ್ಣ ಗೊಲ್ಲ, ಉಪಾಧ್ಯಕ್ಷೆ ರಾಗಿಣಿ, ಪಿಡಿಒ ದಿನೇಶ್ ನಾಯ್ಕ್, ಸದಸ್ಯರಾದ ಲೋಕೇಶ್ ಅಂಕದಕಟ್ಟೆ, ಸುರೇಶ್ ದೇವಾಡಿಗ, ಚಂದ್ರಮೋಹನ್, ನಾಗರಾಜ ಕಾಂಚನ್, ರಾಯ್ಸನ್ ಡಿಮೆಲ್ಲೋ, ಉದಯ್ ನಾಯಕ್, ರಾಜಶೇಖರ ಶೆಟ್ಟಿ, ರಾಜು ಮರಕಾಲ, ವಿವೇಕ್, ಸಂಚಾರಿ ಠಾಣೆ ಪಿಎಸ್‌ಐ ಸುಧಾ ಪ್ರಭು ಹಾಗೂ ಸಿಬ್ಬಂದಿ ಹಾಗೂ ಗ್ರಾಪಂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.