ಶಿರೂರು, ಕಡ್ತಲದಲ್ಲಿ ಅಧಿಕಾರಿಗಳ ಗ್ರಾಮವಾಸ್ತವ್ಯ

ಉಡುಪಿ:ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಅಕ್ಟೋಬರ್ 15 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರೂರು ಗ್ರಾಮದ ಕಲ್ಲಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಶಿರೂರು ಗ್ರಾಮದ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಕರಣಿಕರ ಕಚೇರಿಯಲ್ಲಿ ನೀಡಬಹುದಾಗಿದೆ.

ಕಡ್ತಲ ಗ್ರಾಮದಲ್ಲಿ ಕಾರ್ಕಳ ತಹಶೀಲ್ದಾರರ ಗ್ರಾಮ ವಾಸ್ತವ್ಯ

ಕಾರ್ಕಳ ತಾಲೂಕು ತಹಶೀಲ್ದಾರರು ಅಕ್ಟೋಬರ್ 15 ರಂದು ಬೆಳಗ್ಗೆ 10 ಗಂಟೆಗೆ ಕಡ್ತಲ ಗ್ರಾಮದ ಬರ್ಬರೇಶ್ವರ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಕಡ್ತಲ ಗ್ರಾಮದ ಗ್ರಾಮಸ್ಥರು ಕಂದಾಯ, ಪಂಚಾಯತ್ ರಾಜ್, ಆಹಾರ ಹಾಗೂ ಸರ್ವೇ ಇಲಾಖೆ ಮತ್ತು ಇತರೆ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳಿದ್ದಲ್ಲಿ ಅದನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಸದ್ರಿ ಇಲಾಖೆಯಡಿ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.