ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ವಿಶ್ವ ರಕ್ತದಾನಿಗಳ ದಿನಾಚರಣೆ

ಮಣಿಪಾಲ: ರಕ್ತದಾನ ಮತ್ತು ಸುರಕ್ಷಿತ ರಕ್ತ ಮತ್ತು ರಕ್ತ ಉತ್ಪನ್ನಗಳ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವತಿಯಿಂದ ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮ ಆಯೋಜಿಸಲಾಯಿತು.

ಕೋವಿಡ್ -19 ನಿಯಮಾವಳಿಗಳನ್ನು ಅನುಸರಿಸಿ, ರಕ್ತದಾನಿಗಳನ್ನು ಪ್ರೇರೇಪಿಸಲು ಹೆಚ್ಚಿನ ಕೊಡುಗೆ ನೀಡಿದ ಜನರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಶರತ್ ಕೆ ರಾವ್ ಅವರು, ಈ ವರ್ಷದ ಧ್ಯೇಯವಾದ ‘ರಕ್ತ ನೀಡಿ ಮತ್ತು ಜಗತ್ತಿನ ಹೃದಯ ಬಡಿತ ಉಳಿಸಿರಿ’ ಎಂಬ ವಿಷಯದ ಕುರಿತು ಮಾತನಾಡಿ ರಕ್ತದಾನದ ಮಹತ್ವವನ್ನು ಒತ್ತಿ ಹೇಳಿದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಜೀವ ಉಳಿಸಲು ಮುಂದಾಗಿರುವ ಸ್ವಯಂಪ್ರೇರಿತ ರಕ್ತದಾನಿಗಳನ್ನು ಶ್ಲಾಘಿಸಿದರು ಮತ್ತು ಲಸಿಕಾ ಪೂರ್ವ ರಕ್ತದಾನದ ಕುರಿತು ಮಾಹಿತಿ ನೀಡಿದರು.

ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹಾಗೂ ರತ್ನಾಕರ್ ಸಮಂತ್ ಮಾತನಾಡಿದರು.
ಎಂಐಟಿಯ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಮದ್ದೋಡಿ ಉಪಸ್ಥಿತರಿದ್ದರು.

ಡಾ. ಸತೀಶ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನೀಡುವ ಅತ್ಯುತ್ತಮ ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ಪ್ರಶಸ್ತಿಗಳನ್ನು ರಶ್ಮಿ ಮತ್ತು ಕೃಷ್ಣಮೂರ್ತಿ ರಾವ್ ಅವರಿಗೆ ಪ್ರದಾನ ಮಾಡಲಾಯಿತು. ಅಭಯ ಹಸ್ತ ಹೆಲ್ಪ್‌ಲೈನ್ 2020 ರಲ್ಲಿ ಅತಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ಪ್ರಶಸ್ತಿಯನ್ನು ಪಡೆಯಿತು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ರಕ್ತದಾನಿಗಳನ್ನು ಸಂಘಟಿಸಿದ ಸತೀಶ್ ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದ ನಿರ್ದೇಶಕಿ ಡಾ. ಶಮೀ ಶಾಸ್ತ್ರಿ ಸ್ವಾಗತಿಸಿದರು.