ಉಡುಪಿ: ಇಲ್ಲಿನ ಶಾಸಕ ಯಶ್ ಪಾಲ್ ಸುವರ್ಣ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು.
ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದಲ್ಲಿ ಉಡುಪಿ ಹಾಗೂ ಮಂಗಳೂರು ಭಾಗದ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ.
ಅಲ್ಲದೆ ಕಾರವಾರದಿಂದ ತಿರುಪತಿಗೆ ಹೋಗುವ ವಂದೇ ಭಾರತ್ ರೈಲನ್ನು ಬೆಂಗಳೂರು ಮಾರ್ಗವಾಗಿ ಆರಂಭ ಮಾಡಿದಲ್ಲಿ ಕರಾವಳಿ ಜಿಲ್ಲೆಗಳ ಹೆಚ್ಚಿನ ಉದ್ಯಮಗಳಿಗೆ, ಮೀನುಗಾರರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.
ಡಿಸೆಂಬರ್ ತಿಂಗಳಿನಿಂದ ಜನವರಿ ಅಂತ್ಯದವರೆಗೆ ಉಡುಪಿ ಹಾಗೂ ಮಂಗಳೂರಿನಿಂದ ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡುವಂತೆ ಕೂಡ ಮನವಿ ಮಾಡಿದರು.
ಶಾಸಕರ ಮನವಿಯನ್ನು ಸ್ವೀಕರಿಸಿದ ಸಚಿವೆ ಅದನ್ನು ಕೇಂದ್ರ ರೈಲ್ವೆ ಸಚಿವರಿಗೆ ತಲುಪಿಸುವುದಾಗಿ ಮತ್ತು ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.