ಉಡುಪಿ: ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ, ಮೂಲತಃ ಶಿರೂರಿನ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಆರೋಪಿ ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಆತನಿಂದ 1.03 ಗ್ರಾಂ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಸ್ಕೂಟರ್ ಸೇರಿದಂತೆ ಒಟ್ಟು ₹1.52 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

















