ಕ್ಷೇತ್ರಕ್ಕೆ ಅನುದಾನ ತರಲು ವಿಫಲರಾಗಿರುವ ಯಶ್ ಪಾಲ್ ಸುವರ್ಣರಿಂದ ಸರಕಾರದ ಮೇಲೆ ಆಧಾರ ರಹಿತ ಆರೋಪ; ಪ್ರಸಾದ್‌ರಾಜ್ ಕಾಂಚನ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾಗಿದೆ ಎಂಬ ಶಾಸಕ ಯಶ್ ಪಾಲ್ ಸುವರ್ಣ ಆರೋಪಕ್ಕೆ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ತಿರುಗೇಟು ನೀಡಿದ್ದಾರೆ‌.

ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತನ್ನ ವೈಫಲ್ಯವನ್ನು ಮರೆಮಾಚಲು ರಾಜ್ಯ ಸರಕಾರದ ವಿರುದ್ಧ ಆಧಾರ ರಹಿತ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

2016ರ ಸುತ್ತೋಲೆಯಂತೆ 1.20ಲಕ್ಷ ರೂ.ಕ್ಕಿಂತ ಹೆಚ್ಚಿನ ಆದಾಯವಿರುವ ಕುಟುಂಬಗಳು ಬಿಪಿಎಲ್ ಕಾರ್ಡ್‌ನ ವ್ಯಾಪ್ತಿಗೆ ಬರುವುದಿಲ್ಲ. ಅದರಂತೆ ಜಿಲ್ಲೆಯಲ್ಲಿ 38765 ಕುಟುಂಬಗಳು ಈ ಬಾರಿ ಅನರ್ಹರಾಗಿದ್ದು, ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಲಾಗುತ್ತದೆ. ಶಾಸಕರು ಈ ಕುರಿತು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ತಮ್ಮ ಹೇಳಿಕೆಯನ್ನು ಸಾಬೀತು ಮಾಡಲು ಸಾಧ್ಯವಾಗದಿದ್ದರೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಬದ್ಧರಾಗಿದ್ದಾರೆಯೇ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರ ದಿಕ್ಕನ್ನು ತಪ್ಪಿಸಿ ಶಾಸಕರಾಗಿರುವ ಅವರು, ಜಾತಿ, ಧರ್ಮದ ವಿಚಾರವನ್ನು ಇಟ್ಟುಕೊಂಡು ಸತ್ಯಕ್ಕೆ ದೂರವಾದ ವಿಚಾರದಲ್ಲಿ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಈ ರೀತಿಯ ಆರೋಪ ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಗುಡುಗಿದರು.